ರಸ್ತೆ ಸುರಕ್ಷತೆಯ ಅರಿವು ಪ್ರತಿಯೊಬ್ಬರಿಗೂ ಅಗತ್ಯ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ

ಚಾಮರಾಜನಗರ : ಪ್ರತಿಯೊಂದು ಜೀವವು ಅಮೂಲ್ಯವಾಗಿರುವುದರಿಂದ ರಸ್ತೆ ಸುರಕ್ಷತೆಯ ವ್ಯಾಪಕ ಅರಿವು, ಚಾಲನಾ ಜಾಗರೂಕತೆ ವಾಹನ ಚಲಾಯಿಸುವ ಪ್ರತಿಯೊಬ್ಬರಿಗೂ ಅವಶ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ ಅವರು ತಿಳಿಸಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿಂದು ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಸಂಚಾರಿ ಪೊಲೀಸ್ ಠಾಣೆ ಹಾಗೂ ರೋಟರಿ ಸಿಲ್ಕ್ ಸಿಟಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ 2024ರ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೈನಂದಿನ ಜೀವನದಲ್ಲಿ ಕೆಲವರನ್ನು ಹೊರತುಪಡಿಸಿ ಉಳಿದೆಲ್ಲರು ವಾಹನ ಚಾಲನೆಯಲ್ಲಿ ತೊಡಗಿರುವುದು ಇತ್ತೀಚೆಗೆ ಸರ್ವೇಸಾಮಾನ್ಯವಾಗಿದೆ. ವಾಹನಗಳು ಸಾಕಷ್ಟು ಸಂಖ್ಯೆಯಲ್ಲಿ ರಸ್ತೆಗಿಳಿಯುತ್ತಿರುವುದರಿಂದ ಅಪಘಾತಗಳು ಹೆಚ್ಚಾಗಿವೆ. ರಸ್ತೆ ಅಪಘಾತಗಳನ್ನು ವ್ಯಾಪಕವಾಗಿ ತಡೆಯುವ ನಿಟ್ಟಿನಲ್ಲಿ ಪ್ರತಿವರ್ಷ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡು ಜನಸಾಮಾನ್ಯರಿಗೆ ಅರಿವು ಮೂಡಿಸಲಾಗುತ್ತಿದೆ. ಮುಖ್ಯವಾಗಿ ರಸ್ತೆ ಸುರಕ್ಷತೆಯ ಅರಿವು ಶಾಲಾ ವಿದ್ಯಾರ್ಥಿಗಳಿಗೆ ಅತೀ ಅಗತ್ಯವಾಗಿದೆ ಎಂದರು. ದೇಶದಲ್ಲಿ ಪ್ರತಿವರ್ಷ ರಸ್ತೆ ಅಪಘಾತಗಳಿಂದ 1 ಲಕ್ಷದ ಸಾವಿರಕ್ಕೂ ಅಧಿಕ ಮಂದಿ ಮರಣ ಹೊಂದುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ವರ್ಷ 234 ಅಪಘಾತ ಪ್ರಕರಣಗಳಲ್ಲಿ 256 ಮಂದಿ ಸಾವನಪ್ಪಿದ್ದಾರೆ.
ವಾಹನ ಚಾಲನಾ ಸಮಯದಲ್ಲಿ ಅಜಾಗರೂಕತೆಯಿಂದ ಹೆಲ್ಮೆಟ್, ಸೀಟ್ಬೆಲ್ಟ್ ಹಾಕದಿರುವುದು, ಗಮನ ಬೇರೆಡೆ ಇರುವುದು ಹಾಗೂ ಮೊಬೈಲ್ ಬಳಕೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಎಚ್ಚರಿಕೆಯಿಂದ ರಸ್ತೆ ಸುರಕ್ಷತಾ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮಕ್ಕೂ ಮೊದಲು ಸಂವಿಧಾನ ಪ್ರತಿಜ್ಞಾವಿಧಿ ಬೋದಿಸಿ ಬಳಿಕ ಮಾತನಾಡಿದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್ ಅವರು ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವುದೇ ಸಪ್ತಾಹ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ರಸ್ತೆ ಸಂಚಾರಿ ನಿಯಮಗಳನ್ನು ಅರಿಯಬೇಕು. ರಸ್ತೆ ಅಪಘಾತಗಳನ್ನು ವ್ಯಾಪಕವಾಗಿ ತಡೆಯಲು ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಸಂಚಾರಿ ಪೊಲೀಸ್ ಠಾಣೆಗಳ ಅವಶ್ಯವಿದೆ. ರಸ್ತೆಯಲ್ಲಿ ವೀಲಿಂಗ್, ಒವರ್ ಸ್ಪೀಡ್, ಒವರ್ ಟೆಕ್ ಸಲ್ಲದು. ಇದರಿಂದ ಅಮಾಯಕರು, ಮುಗ್ದರು, ಮೂಕ ಜಾನುವಾರುಗಳು ಬಲಿಯಾಗುತ್ತಿವೆ. ವಾಹನ ಚಾಲನಾ ಸಮಯದಲ್ಲಿ ಯಾವುದೇ ನಿರ್ಲಕ್ಷ್ಯ ಮಾಡಬಾರದು. ರಸ್ತೆ ಅಪಘಾತಗಳ ತಡೆಗೆ ಸಾರ್ವಜನಿಕರ ಸಹಕಾರವು ಅಗತ್ಯವಾಗಿದೆ ಎಂದರು.ಡಿವೈಎಸ್ಪಿ ಲಕ್ಷ್ಮಯ್ಯ, ಪೊಲೀಸ್ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಚಾರ್ಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಆಟೋ ಚಾಲಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.