ಇತ್ತೀಚಿನ ಸುದ್ದಿ

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರದ ಹಸಿರು ನಿಶಾನೆ : ಸಚಿವ ಎನ್.ಎಸ್ ಬೋಸರಾಜು ಸ್ಪಷ್ಟ

ಬೆಂಗಳೂರು : ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ ಕೇಂದ್ರ ಸರಕಾರ ಹಸಿರು ನಿಶಾನೆ ತೋರಿದೆ. ಕೇಂದ್ರ ಸರಕಾರದ ವಿಮಾನಯಾನ ಸಚಿವರೊಂದಿಗೆ ಹಲವಾರು ಬಾರಿ ನಡೆಸಿದ ಚರ್ಚೆಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.

ನಿನ್ನೆ ಕೇಂದ್ರ ಸರಕಾರದಿಂದ ವಿಮಾನ ನಿಲ್ದಾಣಕ್ಕೆ ಹಸಿರು ನಿಶಾನೆ ದೊರೆತಿರುವ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, ನಮ್ಮ ಕಾಂಗ್ರೆಸ್ ಸರಕಾರ ರಾಯಚೂರಿನಲ್ಲಿ ನೂತನ ಗ್ರೀನ್ ಫೀಲ್ಡ್ ಏರ್‌ಪೋರ್ಟ್ ಮಾಡಲು ಬಹಳ ಪ್ರಯತ್ನ ಮಾಡಿತ್ತು. ಅಲ್ಲದೇ, ಆಯವ್ಯಯದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿತ್ತು ಎಂದು ಹೇಳಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕಾಳಜಿ ವಹಿಸಿ ಕೇಂದ್ರ ಸರಕಾರದೊಂದಿಗೆ ಸಮನ್ವಯ ಮಾಡಿದ್ದರು. ರಾಯಚೂರು ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಸಹಕಾರವನ್ನು ಸರಕಾರ ನೀಡುವುದಾಗಿಯೂ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ, ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮದ ವತಿಯಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರ ಬಗ್ಗೆ ಕೈಗಾರಿಕೆ ಮತ್ತು ಮೂಲ ಸೌಕರ್ಯ ಸಚಿವ ಎಂ.ಬಿ.ಪಾಟೀಲ್ ವಿಶೇಷ ಒತ್ತು ನೀಡಿದ್ದರು.

ರಾಯಚೂರು ಸಂಸದ ಜಿ.ಕುಮಾರ ನಾಯ್ಕ್ ನೇತೃತ್ವದ ತಂಡ ಇತ್ತೀಚಿಗೆ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ವಿಮಾನಯಾನ ಸಚಿವರು ಅಗತ್ಯ ಅನುಮತಿಯನ್ನು ನೀಡಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ಭೋಸರಾಜು ಹರ್ಷ ವ್ಯಕ್ತಪಡಿಸಿದ್ದಾರೆ.

ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಗೆ ಉತ್ತಮ ಸಂಪರ್ಕ ದೊರೆತು, ಸರ್ವತೋಮುಖ ಅಭಿವೃದ್ದಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ವರದಿ : ಪೂರ್ಣಿಮಾ ಪವಾರ್ ಸಂಪಾದಕರು tv8kannada ಬೆಂಗಳೂರು

Related Articles

Leave a Reply

Your email address will not be published. Required fields are marked *

Back to top button