ಚಾಮರಾಜನಗರ ಜಿಲ್ಲೆಯಲ್ಲಿ ಆರು ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ: ಇಂಧನ ಸಚಿವ ಕೆ.ಜೆ. ಜಾರ್ಜ್

ಚಾಮರಾಜನಗರ : ಜಿಲ್ಲೆಯಲ್ಲಿ 6 ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿಂದು ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಜಿಲ್ಲೆಯಲ್ಲಿ 400 ಕೆ.ವಿ. ವಿದ್ಯುತ್ ಉಪಕೇಂದ್ರ ಸೇರಿದಂತೆ ಒಟ್ಟು ಆರು ಹೊಸ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಹಾಗೂ ಚೂಡಾ ಅಧ್ಯಕ್ಷರು ಸಭೆಯಲ್ಲಿ ಮನವಿ ಮಾಡಿದ ಮೇರೆಗೆ ಜಿಲ್ಲಾ ಕೇಂದ್ರದ ಬಿ. ರಾಚಯ್ಯ ಜೋಡಿ ರಸ್ತೆಗೆ ಎಲ್.ಇ.ಡಿ ಬಲ್ಬ್ಗಳನ್ನು ಕೆ.ಪಿ.ಟಿ.ಸಿ.ಎಲ್ ನ ಸಿ.ಎಸ್.ಆರ್ ಫಂಡ್ನಿಂದ ಅಳವಡಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
ಅಕ್ರಮ ಸಕ್ರಮ ಯೋಜನೆಯಡಿ ಇರುವ ಅರ್ಜಿಗಳ ವಿಲೇವಾರಿಗೆ ಕ್ರಮವಹಿಸಲಾಗಿದೆ. ಮೊದಲ ಆದ್ಯತೆ ಮೇರೆಗೆ 1,500 ಅರ್ಜಿಗಳನ್ನು ತೆಗೆದುಕೊಳ್ಳಲಿದ್ದೇವೆ. ಇನ್ನೂ ಎರಡು ವರ್ಷದೊಳಗೆ ಬಾಕಿ ಇರುವ ಎಲ್ಲ ಅರ್ಜಿಗಳನ್ನು ಪೂರ್ಣಗೊಳಿಸಲಿದ್ದೇವೆ ಹೇಳಿದರು. ಕುಸುಂ ಬಿ ಯೋಜನೆಯಡಿ ಸೋಲಾರ್ ಪಂಪ್ಸೆಟ್ಗಳಿಗೆ ಶೇ. 80ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 350 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸೋಲಾರ್ ಮೂಲಕ ವಿದ್ಯುತ್ ಉತ್ಪಾದನೆಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ಕುಸುಂ ಬಿ, ಕುಸುಂ ಸಿ ಯೋಜನೆಯಡಿ ಸೋಲಾರ್ ಮೂಲಕ 3000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ಪಂಪ್ಸೆಟ್ಗಳಿಗೆ ಪೂರೈಕೆ ಮಾಡಲಾಗುತ್ತದೆ. ನಿರ್ವಹಣೆ ಕೆಲಸಗಳಿಗಾಗಿ ಸಾಕಷ್ಟು ಹಣ ಇಡಲಾಗಿದೆ ಎಂದರು.

ರಾಜ್ಯದಲ್ಲಿ 2500 ಲೈನ್ಮ್ಯಾನ್ಗಳನ್ನು ನೇಮಕ ಮಾಡಿಕೊಳ್ಳುವ ಸಂದರ್ಶನವನ್ನು ಒಂದೇ ದಿನದಲ್ಲಿ ಮಾಡಲಾಗುತ್ತದೆ. ಈ ಹಿಂದೆ ಬೇರೆ ಬೇರೆ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿತ್ತು. ಹುದ್ದೆಗಳು ಖಾಲಿ ಉಳಿಯದಂತೆ ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುವ ಮಹತ್ವದ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಕೆ.ವಿವೇಕಾನಂದ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ , ಕೆ.ಪಿ.ಟಿ.ಸಿ.ಎಲ್ ಎಂ.ಡಿ. ಪಂಕಜ್ ಕುಮಾರ್ ಪಾಂಡೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶೀಲ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿ.ಪಂ. ಸಿಇಓ ಮೋನಾ ರೋತ್, ಎಸ್ ಪಿ.ಡಾ.ಬಿ.ಟಿ.ಕವಿತಾ, ಸೆಸ್ಕ್ ನ ತಾಂತ್ರಿಕ ನಿರ್ದೇಶಕರಾದ ಮುನಿಗೋಪಾಲ್ರಾಜ್, ಮುಖ್ಯ ಎಂಜಿನಿಯರ್ ದಿವಾಕರ್, ಅಧೀಕ್ಷಕ ಎಂಜಿನಿಯರ್ ತಾರ ಉಪಸ್ಥಿತರಿದ್ದರು.