By Election 2024 | 3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಮತ ಎಣಿಕೆ ಪ್ರಕ್ರಿಯೆ ಆರಂಭ

ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶಕ್ಕೆ ಇದೀಗ ಕ್ಷಣಗಣನೆ ಶುರುವಾಗಿದ್ದು, 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಮತದಾನ ನಡೆದಿತ್ತು.
ಇಂದು ಬೆಳಗ್ಗೆ 8ರಿಂದಲೇ ಮತ ಎಣಿಕೆ ಪ್ರಾರಂಭಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್, ಪ್ರಧಾನ ಪ್ರತಿಪಕ್ಷ ಬಿಜೆಪಿ, ಜೆಡಿಎಸ್ ಪಾಲಿಗೆ ಮಹತ್ವದ ಫಲಿತಾಂಶವಾಗಿದೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶ ಅವಲೋಕಿಸುವುದಾದರೆ ಸಂಡೂರಿನಲ್ಲಿ ಕಾಂಗ್ರೆಸ್ನಿಂದ ತುಕಾರಾಂ, ಶಿಗ್ಗಾಂವಿಯಲ್ಲಿ ಬಿಜೆಪಿಯಿಂದ ಬಸವರಾಜ ಬೊಮ್ಮಾಯಿ, ಚನ್ನಪಟ್ಟಣದಲ್ಲಿ ಜೆಡಿಎಸ್ನಿಂದ ಎಚ್.ಡಿ.ಕುಮಾರಸ್ವಾಮಿ ಗೆದ್ದಿದ್ದರು. ಆದರೆ ಈ ಬಾರಿ ಗೆಲುವು ಯಾರ ಮುಡಿಗೆ ಎಂಬ ಲೆಕ್ಕಾಚಾರಗಳು ಇದೀಗ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.
ಮೊದಲಿಗೆ ಅಂಚೆಮತದಾನ ಎಣಿಕೆ ನಡೆಯಲಿದ್ದು, ನಂತರದಲ್ಲಿ ಇವಿಎಂ ಯಂತ್ರದ ಮತ ಎಣಿಕೆ ಪ್ರಕ್ರಿಯೆ ಆಗಲಿದೆ. ಈಗಾಗಲೇ ಕೌಟಿಂಗ್ ಕೇಂದ್ರಗಳಲ್ಲಿ ಚುನಾವಣಾ ಅಧಿಕಾರಿಗಳ ನೇತೃತ್ವದಲ್ಲಿ ಸ್ಟ್ರಾಂಗ್ ಕೊಠಡಿ ತೆರೆಯಲಾಗಿದೆ. ಬಳ್ಳಾರಿ, ಹಾವೇರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ನಡಿ ಮತ ಎಣಿಕೆ ಪ್ರಕ್ರಿಯೆ ಶುರುವಾಗಿದೆ. ಇನ್ನು ರಾಮನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಣಿಕೆ ಕಾರ್ಯ ನಡೆಯಲಿರುವ ಹಿನ್ನಲೆ ಜಿಲ್ಲಾಧಿಕಾರಿಗಳು ತಡರಾತ್ರಿಯಿಂದಲೇ ಇಡೀ ಜಿಲ್ಲೆಗೆ ನಿಷೇಧಾಜ್ಞೆ ಜಾರಿಗೊಳಿಸಲು ಸೂಚನೆ ನೀಡಿದ್ದಾರೆ. ಪ್ರಸ್ತುತ ಫಲಿತಾಂಶದತ್ತ ಮೈತ್ರಿ (ಬಿಜೆಪಿ-ಜೆಡಿಎಸ್ ) ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಚಿತ್ತ ಮೂಡಿರುವುದು ಸದ್ಯ ರಾಜ್ಯದ ಜನತೆಯಲ್ಲಿ ಕೌತುಕ ಹೆಚ್ಚಿಸಿದೆ.