ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ | MUDA Scam

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ಮುಡಾ ಹಗರಣದ ತನಿಖೆಯನ್ನು ಸಿಬಿಐ ವಹಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಫೆ.07) ವಜಾಗೊಳಿಸಿದೆ.
ಲೋಕಾಯುಕ್ತ ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ, ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸ್ನೇಹಮಯಿ ಕೃಷ್ಣ ಅವರು ಅರ್ಜಿ ಸಲ್ಲಿಸಿದ್ದರು. ಜನವರಿ 27ರಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ, ವಾದ-ಪ್ರತಿವಾದಗಳನ್ನು ಆಲಿಸಿ, ಆದೇಶವನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ. ಲೋಕಾಯುಕ್ತ ಕೂಡ ಒಂದು ಸ್ವತಂತ್ರ ತನಿಖಾ ಸಂಸ್ಥೆ ಎಂದು ಹೇಳಿದೆ.
ತೀರ್ಪು ಬೆನ್ನಲ್ಲೇ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಲಕ್ಷ್ಮಣ ಕುಲಕರ್ಣಿ ಮಾತನಾಡಿ, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಸೀನಿಯರ್ಗಳ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.