ಹುಟ್ಟುಹಬ್ಬದ ದಿನವೇ ದಿನಸಿ ವಿತರಿಸಿದ ತುಪ್ಪದ ಬೆಡಗಿ!

ಬೆಂಗಳೂರು: ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅವರಿಗೆ ಇಂದು ಹುಟ್ಟು ಸಂಭ್ರಮ. ಹುಟ್ಟು ಹಬ್ಬದ ಸಂಭ್ರಮದಂದು ನಟಿ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿ ಹೊಂದಿರುವ ಸಾರ್ವಜನಿಕರಿಗೆ ಪಡಿತರ ಅಕ್ಕಿಯನ್ನು ಹಂಚಿ ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನು ಎಲ್ಲರಿಗೂ ಗೊತ್ತಿರುವ ಹಾಗೆ ನಟಿ ರಾಗಿಣಿ ಅವರು ಸರ್ಕಾರಿ ನ್ಯಾಯ ಬೆಲೆ ಅಂಗಡಿ ಸಿನಿಮಾದಲ್ಲಿ ನಟಿಸುತ್ತಿದ್ದು, ಸರ್ಕಾರಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಸಂಬಂದ ಖುದ್ದು ಅವರೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದಾರೆ.
ಹೌದು, ನಟಿ ರಾಗಿಣಿ ದ್ವಿವೇದಿ ಸದ್ಯ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಅನೇಕರಿಗೆ ಗೊತ್ತಿರಬಹುದು. ಈ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಹಳ್ಳಿಯ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯ ಲೋಪ-ದೋಷಗಳನ್ನು ಎತ್ತಿ ಹಿಡಿಯುವ ಪಾತ್ರ ರಾಗಿಣಿ ಅವರದ್ದು.
ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ನಟಿ ರಾಗಿಣಿ ದ್ವಿವೇದಿ, ತಮ್ಮ ಮುಂಬರುವ ಸಿನಿಮಾ ಮತ್ತು ಪಾತ್ರಕ್ಕೆ ತಕ್ಕಂತೆ ಸರ್ಕಾರಿ ನ್ಯಾಯಬೆಲೆ ಅಂಗಡಿಗೆ ಅಡಿಯಿಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಪ್ರದೇಶದ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ತಾವೇ ಖುದ್ದಾಗಿ ನಿಂತುಕೊಂಡು ಪಡಿತರ ಚೀಟಿದಾರರಿಗೆ ದಿನಸಿ ಸಾಮಾನುಗಳನ್ನು ವಿತರಿಸುವ ಮೂಲಕ ಪಡಿತರ ವಿತರಣೆ ವ್ಯವಸ್ಥೆಯನ್ನು ತಿಳಿದುಕೊಂಡರು. ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರು ಮತ್ತು ವಿತರಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದಾರೆ.
