ದೇಶ

ಆಯುಷ್ಮಾನ್ ಡಿಜಿಟಲ್ ಮಿಷನ್‌ಗೆ ಪ್ರಧಾನಿ ಚಾಲನೆ; ಭಾರತೀಯರಿಗೆ ಅತ್ಯಂತ ಮಹತ್ವದ ದಿನ ಎಂದ ಮೋದಿ

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ಗೆ ಚಾಲನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯುಷ್ಮಾನ್ ಭಾರತ್ ಯೋಜನೆಯ ಹೊಸ ಹಂತಕ್ಕೆ ಚಾಲನೆ ನೀಡಿದ್ದಾರೆ. ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತಾಡಿದ ಪ್ರಧಾನಿ ನರೇಂದ್ರ ಮೋದಿ, 21 ನೇ ಶತಮಾನದಲ್ಲಿ ಭಾರತವು ಮುಂದುವರೆಯಲು ಇಂದು ಅತ್ಯಂತ ಮಹತ್ವದ ದಿನ. ಕಳೆದ 7 ವರ್ಷಗಳ ಹಿಂದೆ ಆರಂಭಿಸಿದ ಆರೋಗ್ಯ ಅಭಿಯಾನವೂ ಈಗ ಹೊಸ ರೂಪ ಪಡೆದುಕೊಂಡಿದೆ. ಭಾರತ್ ಡಿಜಿಟಲ್ ಮಿಷನ್ ಇಂದಿನಿಂದ ಕಾರ್ಯಾರಂಭ ಆಗುತ್ತಿದೆ. ಇದು ಭಾರತೀಯರ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿಕಾರಿ ಶಕ್ತಿಯನ್ನು ತುಂಬಲಿದೆ ಎಂದು ಅಭಿಪ್ರಾಯಪಟ್ಟರು.
3 ವರ್ಷಗಳ ಹಿಂದೆ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಆಯುಷ್ಮಾನ್ ಯೋಜನೆಯನ್ನು ಆರಂಭಿಸಲಾಯಿತು. ಇಂದಿನಿಂದ ದೇಶಾದ್ಯಂತ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಶುರುವಾಗುತ್ತಿದ್ದು, ನನಗೆ ಸಂತೋಷವಾಗಿದೆ ಎಂದರು.

ಇನ್ನು ಈ ಮಿಷನ್ ದೇಶದ ಬಡ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ. ಬಡವರು ಚಿಕಿತ್ಸೆ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ದೊಡ್ಡ ಪಾತ್ರ ವಹಿಸುತ್ತದೆ. ಈ ಹಿಂದೆ ಆರೋಗ್ಯ ಸೇತು ಆಯಪ್ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸಾಕಷ್ಟು ಸಹಾಯ ಮಾಡಿದೆ. ಉಚಿತ ಲಸಿಕೆ ಅಭಿಯಾನದ ಅಡಿಯಲ್ಲಿ ಭಾರತವು ಇಂದು ಸುಮಾರು 90 ಕೋಟಿ ಡೋಸ್‌ ವ್ಯಾಕ್ಸಿನೇಷನ್ ಪೂರೈಸಿದೆ. ಇದರ ಹಿಂದೆ ಕೋ-ವಿನ್‌ ಆಯಪ್ನ ಪಾತ್ರ ದೊಡ್ಡದಿದೆ ಎಂದು ಹೇಳಿದರು.

ಕೊರೊನಾ ಅವಧಿಯಲ್ಲಿ ಟೆಲಿಮೆಡಿಸಿನ್‌ನ ವಿಸ್ತರಣೆಯೂ ಆಗಿದೆ. ಈ ಸೌಲಭ್ಯವು ರಿಮೋಟ್ ಸ್ಥಳಗಳಲ್ಲಿ ವಾಸವಾಗಿರುವ ದೇಶವಾಸಿಗಳು ನಗರದ ದೊಡ್ಡ ಆಸ್ಪತ್ರೆಗಳ ವೈದ್ಯರೊಂದಿಗೆ ಮನೆಯಲ್ಲಿಯೇ ಕುಳಿತು ಸಂಪರ್ಕಿಸಲು ಸಹಾಯ ಆಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಮೊಬೈಲ್ ಅಪ್ಲಿಕೇಶನ್‌ ಮೂಲಕ ಯೋಜನೆಯ ಮಾಹಿತಿ ಲಭ್ಯವಾಗಲಿದೆ. ಯೋಜನೆ ಮೂಲಕ ದೇಶದ ತಜ್ಞ ವೈದ್ಯರೊಂದಿಗೆ ಸಂಪರ್ಕ ಸಾಧಿಸಬಹುದಾಗಿದ್ದು, ಯಾವ ವೈದ್ಯರ ಬಳಿ ಯಾವುದಕ್ಕೆ ಚಿಕಿತ್ಸೆ ಎಂಬ ಮಾಹಿತಿ ಲಭ್ಯವಾಗಲಿದೆ. ಅಲ್ಲದೆ ಮನೆಯಲ್ಲೇ ಕೂತು ಆನ್‌ಲೈನ್‌ ಮೂಲಕ ಸಂಪರ್ಕ ಸಾಧಿಸಬಹುದಾಗಿದೆ. ಡಿಜಿಟಲ್ ಮೂಲಕ ಪ್ರತಿಯೊಬ್ಬ ನಾಗರಿಕನ ಆರೋಗ್ಯ ದಾಖಲೆಯನ್ನು ರಕ್ಷಿಸಲಾಗುತ್ತದೆ ಎನ್ನುತ್ತಿದೆ ಕೇಂದ್ರ.

ಆಯುಷ್ಮಾನ್ ಭಾರತ ಯೋಜನೆಯೂ ಕೂಡ ಇಂದಿನಿಂದ ಡಿಜಿಟಲ್ ರೂಪ ಪಡೆದಿದೆ. ಮೋದಿಯವರ ಡಿಜಿಟಲೀಕರಣ ಕನಸಿಗೆ ಈ ಯೋಜನೆಯೂ ಒಳಪಟ್ಟಿದೆ. ಆದ್ರೆ ಈ ಯೋಜನೆಯೂ ದೇಶದ ಜನತೆಗೆ ಎಷ್ಟು ಪ್ರಯೋಜನ ಆಗಲಿದೆ ಎಂದು ಕಾದು ನೋಡಬೇಕಿದೆ.

Related Articles

Leave a Reply

Your email address will not be published. Required fields are marked *

Back to top button