ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿದ ರಣಮಳೆಗೆ(Bengaluru Rains) ಜನರು ಬೆಚ್ಚಿ ಬಿದ್ದಿದ್ದಾರೆ. ಸೋಮವಾರ ರಾತ್ರಿಯಿಡೀ ಸುರಿದ ಮಳೆಯ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಹಲವೆಡೆ ಮಳೆ ನೀರು ಮನೆಗಳಿಗೆ ನುಗ್ಗಿದ್ದು, ಅಪಾರ ಹಾನಿಯಾಗಿದೆ. ವಸಂತನಗರ, ನಾಗರಭಾವಿ, ಬಸವೇಶ್ವರ ನಗರ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು(Houses Waterlogged) ನುಗ್ಗಿದೆ.
ಇನ್ನು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Kempegowda International Airport)ದಲ್ಲೂ ಮಳೆಯಿಂದಾಗಿ ಭಾರೀ ಅವಾಂತರ ಸೃಷ್ಟಿಯಾಗಿತ್ತು. ವಿಮಾನ ನಿಲ್ದಾಣದ ಬಳಿ ಭಾರೀ ಮಳೆಯ ಪರಿಣಾಮ ಪ್ರಯಾಣಿಕರು ಟ್ರ್ಯಾಕ್ಟರ್(Tractor) ಹೇರಿ ಪ್ರಯಾಣಿಸಿರುವ ವಿಡಿಯೋ ಸಖತ್ ವೈರಲ್ ಆಗಿದೆ.
ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್(Yellow Alert in Karnataka)
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಕರ್ನಾಟಕದಲ್ಲಿ ಇನ್ನೂ ಮೂರು ದಿನ ಅಂದರೆ ಗುರುವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಬಾರಿ ರಾಜ್ಯದಲ್ಲಿ ಮುಂಗಾರು ಮಾರುತ ಇನ್ನೂ ಪ್ರಬಲವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.