ರಾಜಕೀಯ

ಸಿಎಂ ಕೆಳಗಿಳಿಸಲು ಸಾವಿರ ಕೋಟಿ ಇಟ್ಟುಕೊಂಡಿರುವ ಕಾಂಗ್ರೆಸ್ ನಾಯಕರು: ವಿಜಯೇಂದ್ರ


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರೇ ಶಾಸಕರ ಖರೀದಿಗಾಗಿ ಸಾವಿರ ಕೋಟಿ ಇಟ್ಟುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಲು ಹೊರಟಿರುವ ಈ ನಾಯಕರು ಅವರ ಪಕ್ಷದ ಶಾಸಕರನ್ನೇ ಖರೀದಿಸಲು ಮುಂದಾಗಿದ್ದು, ಈ ಬಗ್ಗೆ ಮಾತನಾಡಲು ಸಾಧ್ಯವಾಗದೇ ಸಿದ್ದರಾಮಯ್ಯ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ನಾಯಕರೇ ಸಿದ್ದರಾಮಯ್ಯ ಅವರನ್ನು ಇಳಿಸುವಲ್ಲಿ ಸಫಲರಾಗುತ್ತಿದ್ದಾರೆ. ಈ ಮಾಹಿತಿ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಆದರೆ, ಅವರ ಬಗ್ಗೆ ಮಾತನಾಡಲು ಆಗದೇ ಹತಾಶೆಗೊಂಡಿರುವ ಅವರು ಬಿಜೆಪಿ ಮೇಲೆ ಹರಿಹಾಯುತ್ತಿದ್ದಾರೆ ಎಂದರು.


ಕಾಂಗ್ರೆಸ್ ಪಕ್ಷದೊಳಗೆ ಶಾಸಕರ ಖರೀದಿ ನಡೆದಿದೆ. ಬಿಜೆಪಿಯಲ್ಲಿ ಇರುವುದು ಕೇವಲ 66 ಶಾಸಕರು. ಆದ್ದರಿಂದ ನಾವು ಕಾಂಗ್ರೆಸ್ ಶಾಸಕರನ್ನು ಸೆಳೆದು ಸರ್ಕಾರ ಬೀಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯ ಅವರ ಅಕ್ಕಪಕ್ಕದಲ್ಲಿರುವ ಹಿರಿಯ ಸಚಿವರ ಬಗ್ಗೆಯೇ ಭಯಪಡಬೇಕಾಗಿದೆ. ಬಿಜೆಪಿಯ ಬಗ್ಗೆ ಆತಂಕ ಬೇಕಿಲ್ಲ ಎಂದು ವಿಜಯೇಂದ್ರ ಹೇಳಿದರು.


ಸಿದ್ದರಾಮಯ್ಯ ರಾಜೀನಾಮೆ ಕೊಡುವ ವಿಚಾರ ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಳಿಕ ಯಾವಾಗ ಬೇಕಿದ್ದರೂ ತೀರ್ಮಾನ ಆಗಲಿದೆ. ಡಿಸೆಂಬರ್ನಲ್ಲಿ ಬೆಳಗಾವಿ ಅಧಿವೇಶನಕ್ಕೂ ಮೊದಲು ಆದರು ಅಚ್ಚರಿಪಡಬೇಕಾಗಿಲ್ಲ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button