
ಚಾಮರಾಜನಗರ, ನವೆಂಬರ್ 28: ವೈವಿಧ್ಯಮಯ ಸಂಸ್ಕøತಿ ಹೊಂದಿರುವ ಭಾರತದಲ್ಲಿ ಪ್ರಜಾಸತ್ಯಾತ್ಮಕವಾಗಿ ಸಮಾನ ಅವಕಾಶಗಳನ್ನು ನೀಡುವ ಮೂಲಕ ಏಕತೆಯಿಂದ ಎಲ್ಲರನ್ನು ಒಗ್ಗೂಡಿಸುವುದೇ ಸಂವಿಧಾನ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಎಸ್. ಭಾರತಿ ಅವರು ತಿಳಿಸಿದರು.
ಅಂತರಾಷ್ಟ್ರೀಯ ಸಂವಿಧಾನ ದಿನಾಚರಣೆ (ಸಂವಿಧಾನ ಸಮರ್ಪಣೆ ದಿನ) ಅಂಗವಾಗಿ ತಾಲೂಕಿನ ಹೊಂಡರಬಾಳು ಗ್ರಾಮದಲ್ಲಿರುವ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಡೀ ವಿಶ್ವದಲ್ಲಿಯೇ ಭಾರತ ಬಹುದೊಡ್ಡ ಪ್ರಜಾಪ್ರಭುತ್ವ ದೇಶವಾಗಿ ಹೊರಹೊಮ್ಮಲು ಕಾರಣವಾಗಿರುವುದು ದೇಶದ ಪರಮೋಚ್ಛ ಗ್ರಂಥ ಸಂವಿಧಾನವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಮಾದರಿ ಸಂವಿಧಾನ ರಚಿಸುವ ಮೂಲಕ ಎಲ್ಲಾ ವರ್ಗಗಳಿಗೂ ಸಮಾನ ಅವಕಾಶ ಒದಗಿಸಿ ಸಮಾಜದಲ್ಲಿ ಗೌರವಯುತವಾಗಿ ಬದುಕಲು ಅನುವು ಮಾಡಿಕೊಟ್ಟರು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್, ವಕೀಲರ ಸಂಘದ ಅಧ್ಯಕ್ಷ ನಂಜಯ್ಯ, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ವಿದ್ಯಾಲಯದ ಪ್ರಾಂಶುಪಾಲ ಪ್ರೀತಮ್ ಜೆ, ಉಪ ಪ್ರಾಂಶುಪಾಲ ಡಾ. ದಿನೇಶ್ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಭಾಗವಹಿಸಿದ್ದರು.