ರಾಯಚೂರು | ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿಯ ಬಂಧನ

ಲಿಂಗಸುಗೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಆರೋಪಿಯನ್ನು ಬಂಧಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.
ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ಮಾಸುವ ಮುನ್ನವೇ ಇನ್ನೊಂದು ಘಟನೆ ಬೆಳಕಿಗೆ ಬಂದಿದೆ.
ಚಂದ್ರಶೇಖರ್ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಎಂದು ಗುರುತಿಸಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆ ಬಾಲಕಿಯು ಪಟ್ಟಣದ ಬಸವ ಸಮಿತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದು, ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಚಾಕೊಲೇಟ್ ತೆಗೆದುಕೊಂಡು ಬರಲು ಬಾಲಕಿ ಅಂಗಡಿಗೆ ಹೋದಾಗ ಆರೋಪಿಯು ನಾನು ಚಾಕೊಲೇಟ್ ಕೊಡುವೆನೆಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿಯು ಬಾಲಕಿಯನ್ನು ಕರೆದುಕೊಂಡು ಹೋಗಿ ಮಗುವಿನ ಜತೆ ಅಶ್ಲೀಲವಾಗಿ ಮಾತನಾಡುತ್ತಿರುವುದನ್ನು ಗಮನಿಸಿದ ಪಕ್ಕದ ಮನೆಯವರು ಸಂಶಯಪಟ್ಟು ಹೊರಗೆ ಹೋಗಿ ನೋಡಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಕೂಗಾಡಿದ ಬಳಿಕ ಜನ ಸೇರಿದ್ದು, ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಗುವನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ.
ವರದಿ : ಮುಸ್ತಾಫಾ tv8kannada ಲಿಂಗಸುಗೂರು